ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ ಆಗಸ್ಟ್ 28 : ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯ ವಾಹಿನಿಗೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಮೂಲಕ ದೇಶದೆಲ್ಲೆಡೆ ಸಂಚರಿಸಿ, ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಹರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ನಗರದ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂ ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ದಾರ್ಶನಿಕ, ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕೆ ಮುಂದಾಗಿದ್ದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಪೂಜಿಸಲು ಅವಕಾಶ ಮಾಡಿಕೊಟ್ಟಿದ್ದರು. ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು. ಅಸ್ಪೃಶ್ಯತೆ, ಜಾತೀಯತೆ ಸೇರಿದಂತೆ ಸಾಮಾಜಿಕ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು ಎಂದರು.

ಇಂದು ಕರಾವಳಿ ಭಾಗದಲ್ಲಿ ಅತೀ ವಿಜೃಂಭಣೆಯಿoದ ಅರ್ಥಪೂರ್ಣವಾಗಿ ನಾರಾಯಣ ಗುರುಗಳ 172 ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ. ನಾರಾಯಣ ಗುರುಗಳ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನಾರಾಯಣ ಗುರುಗಳ ಜೀವಿತಾವಧಿಯಲ್ಲಿ ತಾಂಡವವಾಡುತ್ತಿದ್ದ ಮೇಲು-ಕೀಳು, ಅಸ್ಪೃಶ್ಯತೆ ನಿವಾರಣೆಗೆ ಶ್ರಮವಹಿಸುವುದರೊಂದಿಗೆ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ಮಾಡಿದ್ದರು ಎಂದರು.

ಅಂದಿನ ಕಾಲದಲ್ಲಿ ಸ್ವಾಮೀ ವಿವೇಕಾನಂದರು ಕೇರಳಕ್ಕೆ ಭೇಟಿ ನೀಡಿದಾಗ, ಅಲ್ಲಿನ ಮನುಷ್ಯತ್ವ ಇಲ್ಲದ ವಾತಾವರಣವನ್ನು ನೋಡಿ, ಇದೊಂದು ಹುಚ್ಚರ ಸಂತೆ, ಇದನ್ನು ಸರಿ ಮಾಡಲು ಸಾಧ್ಯವೇ ಇಲ್ಲ ಎಂದಿದ್ದರು. ಅಂತಹ ಸಂಘರ್ಷಮಯವಾದ ಪ್ರದೇಶದಲ್ಲಿ ನಾರಾಯಣ ಗುರುಗಳು ತಮ್ಮ ಸಂದೇಶಗಳ ಮೂಲಕ ಶಾಂತಿಯ ಕ್ರಾಂತಿಯೊoದಿಗೆ ಸಾಮಾಜಿಕ ಬದಲಾವಣೆಯನ್ನು ತಂದಿದ್ದರು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಜನರಿಗೂ ಮನ್ನಣೆ ನೀಡಿದ ನಾರಾಯಣ ಗುರುಗಳು, ಹಿಂದುಳಿದ ಸಮುದಾಯಕ್ಕೆ ಶಕ್ತಿ ತುಂಬಿದ್ದರು. ದೀನರ, ಶೋಷಿತರ, ಹಿಂದುಳಿದವರ ಅಸ್ಪೃಶ್ಯರಿಗಾಗಿ ಮಿಡಿಯುವ ಹೃದಯವನ್ನು ಹೊಂದಿದ ಇವರು ಮೌನ ಕ್ರಾಂತಿಯನ್ನು ಮಾಡಿದರು. ಸಮಾಜದ ಆರ್ಥಿಕ ಮತ್ತು ನೈತಿಕ ಅಧಃಪತನಕ್ಕೆ ದಾರಿ ಮಾಡಿಕೊಟ್ಟಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಸಮರ ಸಾರಿದರು.

ಕೇರಳದ ಶೋಷಿತ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳ ಪುನರುತ್ಥಾನ ಮತ್ತು ಹಕ್ಕುಗಳಿಗಾಗಿ ಹೋರಾಟವನ್ನು ನಡೆಸಿ ಸಾಮಾಜಿಕ ಸುಧಾರಣೆಯ ಕ್ರಾಂತಿಯ ಕಹಳೆಯನ್ನು ಊದಿದ್ದರು ಎಂದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತವನ್ನು ನಾವುಗಳು ಪಾಲಿಸುವುದರೊಂದಿಗೆ ಮುಂದಿನ ಪೀಳಿಗೆಯು ಅದನ್ನು ಮುಂದುವರೆಸಿಕೊoಡು ಹೋಗುವಂತೆ ನೋಡಿಕೊಳ್ಳಬೇಕು ಎಂದರು.

ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಿ ಮಾತನಾಡುತ್ತಾ, ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಸಂದೇಶದೊoದಿಗೆ ಶಿಕ್ಷಣ, ಉದ್ಯೋಗ, ಸಂಘಟನೆಗಳಿಗೆ ಆದ್ಯತೆಯ ಮೂಲಕ ಸಮಾನತೆ, ಸಹೋದರತೆ, ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹಾನ್ ಸಂತ, ತತ್ವಜ್ಞಾನಿ, ಸಾಮಾಜಿಕ ಬದಲಾವಣೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು. ನಾರಾಯಣ ಗುರುಗಳ ಚಿಂತನೆಗಳು ಸಮಾಜ ಬದಲಾವಣೆಯಾಗಬೇಕೆಂಬ ಗುರಿ ಹೊಂದಿದ್ದವು. ಅವರ ಜೀವಿತಾವಧಿಯಲ್ಲಿ ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಅಸಮಾನತೆಯ ಪಿಡುಗನ್ನು ಬುಡ ಸಮೇತ ಕಿತ್ತು ಹಾಕಲು ಆಧ್ಯಾತ್ಮಿಕ ಮಾರ್ಗವನ್ನು ಆಯ್ಕೆ ಮಾಡಿಕೊಂಡ ಇವರು, ಬಹು ವೇಗವಾಗಿ ಜನರಿಗೆ ಹತ್ತಿರವಾದರು ಎಂದರು.

ಅಸ್ಪೃಶ್ಯರಿಗೆ ದೇವಾಲಯ ಪ್ರವೇಶ, ಪೂಜೆಯ ಹಕ್ಕನ್ನು ನಿರಾಕರಿಸಿದ ಸಂದರ್ಭದಲ್ಲಿ, ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ ದೇವಾಲಯವನ್ನೇ ನಿಮ್ಮಲ್ಲಿಗೆ ತರುತ್ತೇನೆಂದು ಅವರುಗಳಿಗೆ ಪೂಜೆಯ ಹಕ್ಕನ್ನು ನೀಡಿದರು. ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ಧೈರ್ಯದಿಂದ ಹೋರಾಡಿ, ಎಲ್ಲರಿಗೂ ಸಮಾನತೆ ಹಾಗೂ ಶಿಕ್ಷಣದ ಪ್ರಾಮುಖ್ಯತೆಯನ್ನು ಬೋಧಿಸಿದರು.

ನಾರಾಯಣ ಗುರುಗಳು ಯಾವುದೇ ಒಂದು ಸಮುದಾಯ, ಜಾತಿಗೆ ಮೀಸಲಾಗದೇ, ಇಡೀ ಸಮಾಜದ ಆಸ್ತಿಯಾಗಿ, ಸಮಾಜದಲ್ಲಿರುವ ಜಾತಿವ್ಯವಸ್ಥೆ, ಮೂಢನಂಬಿಕೆ, ಅಂಧಶ್ರದ್ಧೆಯ ವಿರುದ್ಧ ಹೋರಾಟ ನಡೆಸಿದ್ದರು ಎಂದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು.ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಜಿಲ್ಲೆಯಾದ್ಯಂತ ಐದು ವಲಯಗಳಲ್ಲಿ ಆಯೋಜಿಸಲಾದ ಪ್ರಬಂಧ ಸ್ಪರ್ದೆ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಅಧ್ಯಕ್ಷ ಶಶಿಧರ ಎಂ ಅಮೀನ್ ವಡಭಾಂಡೇಶ್ವರ, ಬಿಲ್ಲವ ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ತೇಜಸ್ ಎಂ ಬಂಗೇರ ನಿರೂಪಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ವಂದಿಸಿದರು.

Leave a Reply

Your email address will not be published. Required fields are marked *